
ಹಾಸನ, ಜು.೨೧: ದೆಹಲಿಯ ಜಂತರ್ ಮಂತರ್ನಲ್ಲಿ ನೀಟ್ ಪರೀಕ್ಷೆಯಲ್ಲಿನ ಅಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದನ್ನು ಖಂಡಿಸಿ, ಎಐಡಿಎಸ್ಓ ಹಾಸನ ಜಿಲ್ಲಾ ಕೌನ್ಸಿಲ್ ವತಿಯಿಂದ ನಗರದ ಹೇಮಾವತಿ ಪ್ರತಿಮೆ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿ ಆಕ್ರೋಶವ್ಯಕ್ತಪಡಿಸಿತು.ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಸುಷ್ಮಾ ಮಾತನಾಡಿ, ನೀಟ್-ಯುಜಿ ಪರೀಕ್ಷೆಯಲ್ಲಿನ ಅಕ್ರಮವನ್ನು ವಿರೋಧಿಸಿ ’ಸಂಸದ್ ಚಲೋ’ ಕಾರ್ಯಕ್ರಮದ ಅಂಗವಾಗಿ ಸಂಸತ್ತಿನತ್ತ ತೆರಳುತ್ತಿದ್ದ ವಿದ್ಯಾರ್ಥಿಗಳು ಹಾಗೂ ಯುವಕರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು. ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದ್ದು, ಮುಂಚಿತವಾಗಿಯೇ ಘೋಷಿಸಲಾಗಿದ್ದ ಶಾಂತಿಯುತ ಮೆರವಣಿಗೆಗೆ ಅನುಮತಿ ನಿರಾಕರಿಸಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗ ನಡೆಸಿರುವುದು ಅಪ್ರಜಾಸತ್ತಾತ್ಮಕ ಕ್ರಮವಾಗಿದೆ ಎಂದರು. ಕೇಂದ್ರ ಸರ್ಕಾರದ ಈ ದಮನಕಾರಿ ಧೋರಣೆಯನ್ನು ದೇಶದ ವಿದ್ಯಾರ್ಥಿಗಳು ಸಹಿಸುವುದಿಲ್ಲ.
